ನವದೆಹಲಿ: ಚುನಾವಣೆಗೂ ಮುನ್ನ ರಾಜಕೀಯ ಪಕ್ಷಗಳು ಘೋಷಿಸುವ ಉಚಿತ ಕೊಡುಗೆಗಳ ಸಂಸ್ಕೃತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತೀವ್ರವಾಗಿ ಖಂಡಿಸಿದೆ. ಇಂತಹ ನೀತಿಗಳು ದೇಶದ ಆರ್ಥಿಕ ಪರಿಸ್ಥಿತಿಯನ್ನು ಹದಗೆಡಿಸುತ್ತವೆ ಎಂದು ಎಚ್ಚರಿಸಿರುವ ನ್ಯಾಯಾಲಯ, ಜನರಿಗೆ ಉಚಿತಗಳನ್ನು ಹಂಚುವ ಬದಲು ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಗಮನಹರಿಸಿ ಎಂದು ರಾಜ್ಯ ಸರ್ಕಾರಗಳಿಗೆ ಕಿವಿಮಾತು ಹೇಳಿದೆ.
ಚುನಾವಣೆಗೂ ಮುನ್ನ ನೀಡಲಾಗುವ ಉಚಿತ ಕೊಡುಗೆಗಳ ಸಂಸ್ಕೃತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತೀವ್ರವಾಗಿ ಖಂಡಿಸಿದೆ. ಇಂತಹ ನೀತಿಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಪಡಿಸುವುದರಿಂದ, ಇವುಗಳನ್ನು ಮರುಪರಿಶೀಲಿಸುವ ಸಮಯ ಬಂದಿದೆ ಎಂದು ನ್ಯಾಯಾಲಯ ಹೇಳಿದೆ. ತಮಿಳುನಾಡು ಸರ್ಕಾರವು ಚುನಾವಣೆಗೂ ಮುನ್ನ ಉಚಿತಗಳನ್ನು ವಿತರಿಸುತ್ತಿರುವುದನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್, “ನೀವು ಎಂತಹ ಸಂಸ್ಕೃತಿಯನ್ನು ಬೆಳೆಸಲು ಪ್ರಯತ್ನಿಸುತ್ತಿದ್ದೀರಿ?” ಎಂದು ತರಾಟೆಗೆ ತೆಗೆದುಕೊಂಡಿದೆ.
ಗ್ರಾಹಕರ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ ಎಲ್ಲರಿಗೂ ಉಚಿತ ವಿದ್ಯುತ್ ನೀಡುವ ತಮಿಳುನಾಡು ಪವರ್ ಡಿಸ್ಟ್ರಿಬ್ಯೂಷನ್ ಕಾರ್ಪೊರೇಷನ್ ಲಿಮಿಟೆಡ್ನ ಪ್ರಸ್ತಾವನೆಯ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಗಂಭೀರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.
ರಾಷ್ಟ್ರನಿರ್ಮಾಣಕ್ಕೆ ಮಾರಕ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಾಂಚೋಲಿ ಅವರನ್ನೊಳಗೊಂಡ ಪೀಠವು, “ಜನರನ್ನು ಸಬಲೀಕರಣಗೊಳಿಸುವುದು ರಾಜ್ಯದ ಜವಾಬ್ದಾರಿಯಾದರೂ, ಬೆಳಿಗ್ಗೆಯಿಂದ ರಾತ್ರಿಯವರೆಗೆ ಉಚಿತಗಳನ್ನು ನೀಡುವುದು ರಾಷ್ಟ್ರವನ್ನು ಕಟ್ಟುವ ದಾರಿಯಲ್ಲ” ಎಂದು ಒತ್ತಿಹೇಳಿದೆ.ದೇಶದ ಬಹುತೇಕ ರಾಜ್ಯಗಳು ಈಗಾಗಲೇ ಆದಾಯದ ಕೊರತೆಯನ್ನು ಎದುರಿಸುತ್ತಿವೆ. ಇಂತಹ ನೀತಿಗಳು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸುತ್ತವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದಂತೆ ಮಾಡುತ್ತವೆ.
ಉದ್ಯೋಗಕ್ಕೆ ಆದ್ಯತೆ ನೀಡಿ: ರಾಷ್ಟ್ರದ ಆರ್ಥಿಕ ಅಭಿವೃದ್ಧಿಗೆ ಇಂತಹ ಉದಾರ ಹಂಚಿಕೆಗಳು ಅಡ್ಡಿಯಾಗುತ್ತವೆ. ರಾಜ್ಯಗಳು ಎಲ್ಲರಿಗೂ ಉಚಿತ ಆಹಾರ, ಸೈಕಲ್ ಅಥವಾ ವಿದ್ಯುತ್ ನೀಡುವ ಬದಲಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಶ್ರಮಿಸಬೇಕು ಎಂದು ಪೀಠ ಹೇಳಿದೆ.
ಸಿಜೆಐ ಪ್ರಶ್ನೆಗಳು
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಡಿಎಂಕೆ ಸರ್ಕಾರ ನೇತೃತ್ವದ ವಿದ್ಯುತ್ ವಿತರಣಾ ಸಂಸ್ಥೆಯ ನಡೆಯನ್ನು ಪ್ರಶ್ನಿಸುತ್ತಾ ಹೀಗೆಂದರು.
“ಭಾರತದಲ್ಲಿ ನಾವು ಎಂತಹ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುತ್ತಿದ್ದೇವೆ? ವಿದ್ಯುತ್ ಬಿಲ್ ಪಾವತಿಸಲು ಅಶಕ್ತರಾದವರಿಗೆ ಕಲ್ಯಾಣ ಯೋಜನೆಯಡಿ ಸಹಾಯ ಮಾಡುವುದು ಅರ್ಥವಾಗುತ್ತದೆ. ಆದರೆ, ಶ್ರೀಮಂತರು ಮತ್ತು ಬಡವರ ನಡುವೆ ವ್ಯತ್ಯಾಸವನ್ನು ಗುರುತಿಸದೆ ಎಲ್ಲರಿಗೂ ವಿತರಿಸುವುದು ಓಲೈಕೆಯ ರಾಜಕಾರಣವಲ್ಲವೇ?”ಅಲ್ಲದೆ, “ರಾಜ್ಯಗಳು ಅಭಿವೃದ್ಧಿ ಯೋಜನೆಗಳಿಗೆ ಹಣ ವಿನಿಯೋಗಿಸುವ ಬದಲು ಕೇವಲ ಸಂಬಳ ಪಾವತಿಸುವುದು ಮತ್ತು ಇಂತಹ ಉಚಿತಗಳನ್ನು ಹಂಚುವ ಕೆಲಸವನ್ನಷ್ಟೇ ಮಾಡುತ್ತಿವೆ. ಬೆಳಿಗ್ಗೆಯಿಂದ ಸಂಜೆಯವರೆಗೆ ಎಲ್ಲವನ್ನೂ ಉಚಿತವಾಗಿ ನೀಡುತ್ತಿದ್ದರೆ ಕೆಲಸ ಮಾಡುವವರು ಯಾರು? ಇದರಿಂದ ಕೆಲಸದ ಸಂಸ್ಕೃತಿ ಏನಾಗುತ್ತದೆ?” ಎಂದು ಸಿಜೆಐ ಕಳವಳ ವ್ಯಕ್ತಪಡಿಸಿದ್ದಾರೆ.








